Saturday, August 16, 2008

Cucumber-Carrot salad / ಸೌತೆಕಾಯಿ ಮತ್ತು ಕ್ಯಾರೆಟ್ ಸಲಾಡ್:


ಸೌತೆಕಾಯಿ ಮತ್ತು ಕ್ಯಾರೆಟ್ ಸಲಾಡ್:

ಸೌತೆಕಾಯಿ ಮತ್ತು ಕ್ಯಾರೆಟ್ ಅನ್ನು ನಿಮಗೆ ಬೇಕಾದ ಆಕಾರದಲ್ಲಿ ಕತ್ತರಿಸಿ, ಅದರ ಮೇಲೆ ಉಪ್ಪು ಮತ್ತು ಕಾಳು ಮೆಣಸಿನ ಪುಡಿಯನ್ನು ಉದುರಿಸಿ.ಇದು ಸರಳವಾದ ಸಲಾಡ್.

Wednesday, August 13, 2008

ಸೌತೆಕಾಯಿ ಚಟ್ನಿ/ Cucumber chutney

ಸೌತೆಕಾಯಿ ಚಟ್ನಿ:

ಸಾಮಗ್ರಿಗಳು:

ಸೌತೆಕಾಯಿ - ಒಂದು
ಕಾಯಿತುರಿ - ಒಂದು ಬಟ್ಟಲು
ಹುರಿಗಡಲೆ ಸ್ವಲ್ಪ
ಹುಣಸೆಹಣ್ಣು ಚೂರು
ಕೊತ್ತುಂಬರಿಸೊಪ್ಪು
ಹಸಿರು/ಒಣಮೆಣಸಿನಕಾಯಿಗಳು ರುಚಿಗೆ
ಉಪ್ಪು ರುಚಿಗೆ

ವಿಧಾನ:

ಕೊತ್ತುಂಬರಿಸೊಪ್ಪನ್ನು ಚೆನ್ನಾಗಿ ಬಿಡಿಸಿ, ತೊಳೆದು ಇಡಿ. ಸೌತೆಕಾಯಿಯನ್ನು ತೊಳೆದು ಸಿಪ್ಪೆ ತೆಗೆದು ಅದಕ್ಕೆ ಕಾಯಿತುರಿ,ಹುರಿಗಡಲೆ,ಹುಣಸೆಹಣ್ಣು,ಒಣ ಅಥವಾ ಹಸಿಮೆಣಸಿನಕಾಯಿ,ಕೊತ್ತುಂಬರಿಸೊಪ್ಪು ಮತ್ತು ಉಪ್ಪು ಹಾಕಿ,ಎಲ್ಲವನ್ನು ಸೇರಿಸಿ ಸ್ವಲ್ಪ ನೀರು ಹಾಕಿ ರುಬ್ಬಿಕೊಳ್ಳಿ.

Tuesday, August 12, 2008

Black Eye Beans - ಹಲಸಂದೆಕಾಳು ಉಸಲಿ:

ಹಲಸಂದೆಕಾಳು ಉಸಲಿ:

ಸಾಮಗ್ರಿಗಳು:
ಹಲಸಂದೆಕಾಳು ಒಂದು ಬಟ್ಟಲು
ಹೆಚ್ಚಿದ ಈರುಳ್ಳಿ ಸ್ವಲ್ಪ
ಹೆಚ್ಚಿದ ಹಸಿಮೆಣಸಿನಕಾಯಿ
ಎಣ್ಣೆ, ಸಾಸಿವೆ
ಕರಿಬೇವು
ಉಪ್ಪು ರುಚಿಗೆ
ಕೊತ್ತುಂಬರಿಸೊಪ್ಪು
ಕಾಯಿತುರಿ
ನಿಂಬೆರಸ ಸ್ವಲ್ಪ
ವಿಧಾನ:
ಹಲಸಂದೆಕಾಳನ್ನು ನೀರಿನಲ್ಲಿ ಚೆನ್ನಾಗಿ ತೊಳೆಯಿರಿ. ಕುಕ್ಕರ್ ಗೆ ಕಾಳುಗಳನ್ನು ಹಾಕಿ ಒಂದು ಲೋಟ ನೀರು ಹಾಕಿ,ಉಪ್ಪು ಮತ್ತು ಎಣ್ಣೆ ಸ್ವಲ್ಪ ಹಾಕಿ. ಬೇಯಿಸಿಕೊಳ್ಳಿ. ನೀರು ಜಾಸ್ತಿ ಹಾಕಿದ್ದರೆ ನೀರು ಬಸಿಯಿರಿ. ನೀರು ಎಷ್ಟು ಬೇಕೋ ಅಷ್ಟು ಮಾತ್ರ ಹಾಕಿ,ಕಾಳುಗಳು ಕರಗದಂತೆ ಗಟ್ಟಿಯಾಗಿ ಬೇಯಿಸಿಕೊಳ್ಳಿ.
ಪಾತ್ರೆ/ಬಾಣಲೆಗೆ ಒಂದೆರಡು ಚಮಚ ಎಣ್ಣೆ ಹಾಕಿ,ಸಾಸಿವೆ,ಕರಿಬೇವು,ಹಸಿಮೆಣಸಿನಕಾಯಿ,ಈರುಳ್ಳಿಯನ್ನು ಹಾಕಿ,ಕೆಲವು ನಿಮಿಷ ಹುರಿಯಿರಿ,ಈರುಳ್ಳಿಯೂ ಸ್ವಲ್ಪ ಬಣ್ಣ ನಂತರ ಚಿಟಿಕೆ ಉಪ್ಪು ಹಾಕಿ,ಬೇಯಿಸಿರುವ ಕಾಳನ್ನು ಹಾಕಿ,ಎಲ್ಲವನ್ನು ಚೆನ್ನಾಗಿ ಬೆರೆಸಿ.ನಿಂಬೆರಸ,ಕಾಯಿತುರಿ ಮತ್ತು ಕೊತ್ತುಂಬರಿ ಸೊಪ್ಪನ್ನು ಹಾಕಿ ಸರಿಯಾಗಿ ಬೆರೆಸಿ.ಇದನ್ನು ಊಟಕ್ಕೆ ನೆಂಚಿಕೊಳ್ಳಬಹುದು.ಚಪಾತಿಯೊಂದಿಗೆ ತಿನ್ನಬಹುದು.ಸಂಜೆ ಕಾಫಿಯೊಂದಿಗೆ ಸ್ನಾಕ್ ತರಹ ಸರ್ವ್ ಮಾಡಿ.

Sweet Dosa/dose/ ಬೆಲ್ಲದ ದೋಸೆ



ಬೆಲ್ಲದ ದೋಸೆ:

ಸಾಮಗ್ರಿಗಳು:

ಅಕ್ಕಿ - ಒಂದು ಕಪ್
ಬೆಲ್ಲ ರುಚಿಗೆ / ಒಂದು ಕಪ್
ಚಿಟಿಕೆ ಉಪ್ಪು
ಚಿಟಿಕೆ ಸೋಡ

ವಿಧಾನ;

ಅಕ್ಕಿಯನ್ನು ಮೂರ್ನಾಲ್ಕು ಗಂಟೆ ನೆನೆಸಿ, ಅದನ್ನು ಬೆಲ್ಲದೊಂದಿಗೆ ರುಬ್ಬಿಕೊಳ್ಳಿ. ಉಪ್ಪು ಮತ್ತು ಸೋಡ ಸೇರಿಸಿ, ಚೆನ್ನಾಗಿ ಬೆರೆಸಿ ಅರ್ಧ ಗಂಟೆ ಬಿಟ್ಟು ತವಾ ಒಲೆಯ ಮೇಲಿಟ್ಟು, ಕಾಯಿಸಿ, ತುಪ್ಪ / ಎಣ್ಣೆ ಹಾಕಿ ಸವರಿ, ಅದರ ಮೇಲೆ ಒಂದು ಸೌಟು ರುಬ್ಬಿದ ಮಿಶ್ರಣವನ್ನು ಹಾಕಿ ದೋಸೆಯಂತೆ ಮಾಡಿ, ಬೇಯಿಸಿ , ತೆಗೆಯಿರಿ. ತುಪ್ಪ ಹಾಕಿ ತಿನ್ನಲು ಕೊಡಿ. ಇದು ತಿನ್ನಲು ಕಜ್ಜಾಯದ ತರಹ ರುಚಿಯಾಗಿರುತ್ತದೆ.
*ಕಾಯಿತುರಿ ಬೇಕಾದವರು ಅಕ್ಕಿ ರುಬ್ಬುವಾಗ ಅದರ ಜೊತೆ ಬೆರೆಸಿ,ರುಬ್ಬಿ.

Sunday, July 20, 2008

Sprouted Green gram Masala / Molake kaalina saaru


ಮೊಳಕೆ ಹೆಸರು ಕಾಳಿನ ಮಸಾಲೆ ಸಾರು:
ಬೇಕಾಗುವ ಸಾಮಗ್ರಿಗಳು:

ಹೆಸರು ಕಾಳು
ಈರುಳ್ಳಿ- ಎರಡು
ಬೆಳ್ಳುಳ್ಳಿ- ನಾಲ್ಕೈದು ಎಸಳು
ಶುಂಠಿ -ಒಂದಿಂಚು
ಹಸಿಮೆಣಸಿನಕಾಯಿ - ಒಂದು
ತೆಂಗಿನಕಾಯಿ ತುರಿ-ಅರ್ಧ ಬಟ್ಟಲು
ಅಚ್ಚಖಾರದ ಪುಡಿ
ಧನಿಯಾ ಪುಡಿ
ಹುರಿಗಡಲೆ ಸ್ವಲ್ಪ
ಗಸಗಸೆ-ಒಂದು ಚಿಕ್ಕ ಚಮಚ
ಚೆಕ್ಕೆ, ಲವಂಗ, ಏಲಕ್ಕಿ, ಮೊಗ್ಗು, ಮೆಣಸು
ಕೊತ್ತುಂಬರಿ ಸೊಪ್ಪು
ತರಕಾರಿ (ಬೇಕಾದರೆ- ಆಲೂಗೆಡ್ಡೆ, ಕ್ಯಾರೆಟ್, ಬದನೆಕಾಯಿ,ಹುರುಳಿಕಾಯಿ)
ಟಮೋಟೊ - ಎರಡು, ಹೆಚ್ಚಿಕೊಳ್ಳಿ
ಉಪ್ಪು
ಎಣ್ಣೆ

ತಯಾರಿಸುವ ವಿಧಾನ:

ಹೆಸರುಕಾಳನ್ನು ಹಿಂದಿನ ದಿನವೇ ಬೆಳಗ್ಗೆ ಚೆನ್ನಾಗಿ ತೊಳೆದು,ನಾಲ್ಕು- ಐದು ಗಂಟೆಗಳು ನೆನೆಸಿ,ನೀರು ಬಸಿದುಕೊಂಡು,ಕಾಳನ್ನು ಗಾಳಿ ಆಡದ ಡಬ್ಬಿಯಲ್ಲಿ ಹಾಕಿಡಿ. ಮಾರನೇ ದಿನಕ್ಕೆ ಅದು ಮೊಳಕೆ ಬಂದಿರುತ್ತದೆ,(ಜಾಸ್ತಿ ಮೊಳಕೆ ಬೇಕಾದರೆ ಎರಡು ದಿನ ಬಿಡಿ).ಈಗ ಮೊಳಕೆ/ಮಡಿಕೆ ಕಾಳು ರೆಡಿ.

ಮಸಾಲೆ ತಯಾರಿಸಲು:
ಈರುಳ್ಳಿಯನ್ನು ಸುಮಾರಾಗಿ ಹೆಚ್ಚಿಕೊಂಡು ಅದನ್ನು ಬೆಳ್ಳುಳ್ಳಿ ಮತ್ತು ಶುಂಠಿಯೊಂದಿಗೆ ಒಂದು ಚಮಚ ಎಣ್ಣೆಯನ್ನು ಹಾಕಿ ಹುರಿದುಕೊಳ್ಳಿ. ಅದಕ್ಕೆ ಚೆಕ್ಕೆ, ಲವಂಗ,ಏಲಕ್ಕಿ,ಮೆಣಸು,ಮೊಗ್ಗು,ಕೊತ್ತುಂಬರಿಸೊಪ್ಪು ಮತ್ತು ಹಸಿಮೆಣಸಿನಕಾಯಿ ಕೂಡ ಹಾಕಿ ಒಂದೆರಡು ನಿಮಿಷ ಹುರಿದುಕೊಳ್ಳಿ. ಹುರಿದ ಈ ಮಿಶ್ರಣದ ಜೊತೆಗೆ ತೆಂಗಿನಕಾಯಿ ತುರಿ,ಹುರಿಗಡಲೆ,ಗಸಗಸೆ,ಟಮೋಟೊ,ಅಚ್ಚಖಾರದ ಪುಡಿ ಮತ್ತು ಧನಿಯಾಪುಡಿ ಎಲ್ಲವನ್ನೂ ಸೇರಿಸಿ,ನುಣ್ಣಗೆ ರುಬ್ಬಿಕೊಳ್ಳಿ. ಮಸಾಲೆ ರೆಡಿಯಾಯಿತು.

ಮೊದಲು ಪಾತ್ರೆಗೆ ಸ್ವಲ್ಪ ಎಣ್ಣೆಯನ್ನು ಹಾಕಿ, ಅದಕ್ಕೆ ಚಿಟಿಕೆ ಸಾಸಿವೆ ಹಾಕಿ, ಚಟಪಟ ಅಂದ ಮೇಲೆ ತರಕಾರಿ ಹಾಕಿ, ಒಂದೆರಡು ನಿಮಿಷ ಹುರಿದು, ಕಾಳುಗಳನ್ನು ಹಾಕಿ ಅದನ್ನು ಮೂರ್ನಾಕು ನಿಮಿಷ ಹುರಿದು,ಅರಿಶಿಣ,ಉಪ್ಪು ಮತ್ತು ರುಬ್ಬಿದ ಮಸಾಲೆ ಹಾಕಿ ಚೆನ್ನಾಗಿ ತಿರುವಿ,ಉಪ್ಪು ಮತ್ತು ಕಾರ ನಿಮ್ಮ ರುಚಿಗೆ ತಕ್ಕಷ್ಟು ಬೆರೆಸಿ,ನೀರು ಹಾಕಿ ಮುಚ್ಚಿಟ್ಟು ಬೇಯಿಸಿ. ತುಂಬಾ ಬೇಯಿಸದಿರಿ. ಕಾಳುಗಳು ಬೇಗ ಮೆತ್ತಗಾಗಿ ಕರಗುತ್ತದೆ,ನೋಡಿಕೊಂಡು ಬೇಯಿಸಿ. ಈ ಮಸಾಲೆ ಸಾರಿಗೆ ರಾಗಿಮುದ್ದೆ ಚೆನ್ನಾಗಿರುತ್ತದೆ. ಇದನ್ನು ಬಿಳಿಅನ್ನ,ಚಪಾತಿ,ಪೂರಿ ಅಥವಾ ರೊಟ್ಟಿ ಯಾವುದರೊಂದಿಗಾದರೂ ಸರ್ವ್ ಮಾಡಿ.


* ಉಪ್ಪು ಮತ್ತು ಕಾರವನ್ನು ನಿಮ್ಮ ರುಚಿಗೆ ತಕ್ಕಂತೆ ಸೇರಿಸಿಕೊಳ್ಳಿ. ಕಾಳುಗಳು ನಿಮಗೆ ಬೇಕಾದ ಪ್ರಮಾಣದಲ್ಲಿ ತೆಗೆದುಕೊಳ್ಳಿ.
*ಕಾಳುಗಳನ್ನು ಮೊಳಕೆ ಬರಿಸಲು - strainerನಲ್ಲಿ ಕಾಳನ್ನು ಹಾಕಿ ಅದನ್ನು ಮುಚ್ಚಿಟ್ಟು, ಅದರ ಕೆಳಗೆ ಅದಕ್ಕೆ ಸರಿಯಾದ ಒಂದು ಪಾತ್ರೆಯನ್ನು ಇಟ್ಟರೆ ಕೂಡ ಚೆನ್ನಾಗಿ ಮೊಳಕೆ ಬರುತ್ತದೆ.
**ಮೊಳಕೆ ಕಾಳು, ಮಡಿಕೆ ಕಾಳು ಅಥವ ಮೊಳೆತ ಕಾಳು ಹೀಗೆ ಒಬ್ಬೊಬ್ಬರು ಒಂದೊಂದು ರೀತಿ ಕರೆಯುತ್ತಾರೆ.

Upma / Uppittu- ಉಪ್ಪಿಟ್ಟು:


ಉಪ್ಪಿಟ್ಟು:
ಸಾಮಗ್ರಿಗಳು:

ರವೆ
ಎಣ್ಣೆ
ಸಾಸಿವೆ
ಹಸಿಮೆಣಸಿನಕಾಯಿ
ಈರುಳ್ಳಿ
ಕರಿಬೇವು
ಕಡ್ಲೆಬೇಳೆ
ಉದ್ದಿನಬೇಳೆ
ಉಪ್ಪು
ಕಾಯಿತುರಿ
ಕೊತ್ತುಂಬರಿಸೊಪ್ಪು
ನಿಂಬೆರಸ
ವಿಧಾನ:

ರವೆಗೆ ಒಂದೆರಡು ಚಮಚ ಎಣ್ಣೆ ಹಾಕಿ ಹುರಿದುಕೊಳ್ಳಿ,ರವೆಯನ್ನು ಸೀದೀಸದೆ,ಘಂ ಎನ್ನುವ ವಾಸನೆ ಬರುವವರೆಗೂ ಹುರಿದು ತೆಗೆದಿಡಿ.
ಬಾಣಲೆಯಲ್ಲಿ ನಾಲ್ಕು ಚಮಚ ಎಣ್ಣೆ ಹಾಕಿ,ಕಾದ ಬಳಿಕ ಸಾಸಿವೆ,ಕರಿಬೇವು,ಕಡ್ಲೆಬೇಳೆ ಉದ್ದಿನಬೇಳೆ,ಹಸಿಮೆಣಸಿನಕಾಯಿ ಹಾಕಿ,ಹಾಕಿ,ಬೆರೆಸಿ. ಈರುಳ್ಳಿ ಹಾಕಿ ಹಾಗೆ ಸ್ವಲ್ಪ ಹೊತ್ತು ಹುರಿಯಿರಿ. ಒಂದೆರಡು ನಿಮಿಷದ ನಂತರ ಉಪ್ಪು ಹಾಕಿ,ಅಗತ್ಯವಿದ್ದಷ್ಟು ನೀರು ಹಾಕಿ,ಎಲ್ಲಾ ಹೊಂದಿಕೊಳ್ಳುವಂತೆ ಸರಿಯಾಗಿ ಬೆರೆಸಿ. ಕುದಿಯಲು ಬಿಡಿ. ನೀರು ಒಂದು ಕುದಿ ಬಂದ ತಕ್ಷಣ ರವೆಯನ್ನು ಕುದಿಯುತ್ತಿರುವ ನೀರಿಗೆ ನಿಧಾನವಾಗಿ ಹಾಕುತ್ತಾ,ಆಗೆ ಗಂಟು ಬರದಂತೆ ತಿರುವುತ್ತಿರಿ. ಪೂರ್ತಿ ರವೆ ಹಾಕಿದ ನಂತರ ಅದಕ್ಕೆ ಕಾಯಿತುರಿ,ಕೊತ್ತುಂಬರಿಸೊಪ್ಪು ಮತ್ತು ನಿಂಬೆರಸ ಹಾಕಿ ಚೆನ್ನಾಗಿ ಬೆರೆಸಿ. ಬಿಸಿ ಬಿಸಿಯಾಗಿರುವಾಗಲೇ ಉಪ್ಪಿಟ್ಟನ್ನು ತಿನ್ನಬೇಕು ಇಲ್ಲವೆಂದರೆ ಹೆಸರಿಗೆ ತಕ್ಕಂತೆ ಕಾಂಕ್ರೀಟ್ ತರ ಗಟ್ಟಿಯಾಗುತ್ತದೆ.

Wednesday, July 16, 2008

ಕ್ಯಾರೆಟ್ ಮತ್ತು ಎಲೆಕೋಸು ಸಲಾಡ್:CarrotCabbageSalad


ಕ್ಯಾರೆಟ್ ಮತ್ತು ಎಲೆಕೋಸು ಸಲಾಡ್:


ಕ್ಯಾರೆಟ್ - ಒಂದು ಬಟ್ಟಲು
ಕ್ಯಾಬೇಜ್-ಒಂದು ಬಟ್ಟಲು
ಮಯನ್ನೈಸ್- ಎರಡು ದೊಡ್ಡ ಚಮಚ
ವಿನಿಗರ್-ಕಾಲು ಚಮಚ
ಮೆಣಸಿನಪುಡಿ
ಚಿಲ್ಲಿ ಸಾಸ್
ಕೊತ್ತುಂಬರಿಸೊಪ್ಪು
ಉಪ್ಪು

ವಿಧಾನ:
ಕ್ಯಾರೆಟ್ ಮತ್ತು ಎಲೆಕೋಸು ತುರಿದುಕೊಳ್ಳಿ. ಅದಕ್ಕೆ ಮಯೊನ್ನೈಸ್(Mayonnaise),ಚಿಲ್ಲಿ ಸಾಸ್,ವಿನಿಗರ್,ಉಪ್ಪು ಮತ್ತು ಕಾಳುಮೆಣಸಿನಪುಡಿ,ಕೊತ್ತುಂಬರಿ ಸೊಪ್ಪು ಸೇರಿಸಿ ಚೆನ್ನಾಗಿ ಕಲೆಸಿ, ಇದು ತುಂಬ ಟೇಸ್ಟೀ ಆಗಿರುತ್ತದೆ.

Friday, July 11, 2008

Sweet ShankaraPoli / ಸಿಹಿ ಶಂಕರ ಪೋಳಿ

ಸಿಹಿ ಶಂಕರ ಪೋಳಿ:

ಸಾಮಗ್ರಿಗಳು:
ಮೈದಾಹಿಟ್ಟು - ಒಂದು ಬಟ್ಟಲು
ಸಕ್ಕರೆ ಪುಡಿ ಎರಡು ದೊಡ್ಡ ಚಮಚ/ರುಚಿಗೆ
ಡಾಲ್ಡ / ಬೆಣ್ಣೆ / ತುಪ್ಪ- ಸ್ವಲ್ಪ
ಎಣ್ಣೆ ಕರಿಯಲು


ವಿಧಾನ:

ಮೈದಾ, ಸಕ್ಕರೆಪುಡಿ ಮತ್ತು ಡಾಲ್ಡ ಎಲ್ಲವನ್ನು ಚೆನ್ನಾಗಿ ಬೆರೆಸಿ, ನೀರು ಹಾಕಿಕೊಂಡು ಗಟ್ಟಿಯಾಗಿ ಪೂರಿ ಹಿಟ್ಟಿನ ಹದಕ್ಕೆ ಅಥವ ಅದಕ್ಕಿಂತ ಸ್ವಲ್ಪ ಗಟ್ಟಿಯಾಗಿ ಕಲೆಸಿ. ಇದನ್ನು ಹದಿನೈದು ನಿಮಿಷ ಮುಚ್ಚಿಡಿ. ನಂತರ ಹಿಟ್ಟಿನಿಂದ ಕಿತ್ತಳೆಗಾತ್ರದ ಉಂಡೆಯನ್ನು ತೆಗೆದುಕೊಂಡು ಅದನ್ನು ಚಪಾತಿಯಂತೆ ಮಣೆ ಮೇಲೆ ಲಟ್ಟಿಸಿ ಸ್ವಲ್ಪ ತೆಳುವಾಗಿರಲಿ. ಆಮೇಲೆ ಅದನ್ನು ಚಾಕು ಅಥವಾ ಕಟ್ಟರ್ ನಿಂದ ಡೈಮಂಡ್ ಆಕಾರಕ್ಕೆ ಕತ್ತರಿಸಿ. ಕಾದಿರುವ ಎಣ್ಣೆಯಲ್ಲಿ ಒಂದೊಂದಾಗಿ ತೆಗೆದು ಹಾಕಿ. ಬಾಣಲೆಗೆ ಎಷ್ಟು ಹಿಡಿಸುತ್ತದೋ ಅಷ್ಟು ಹಾಕಿ, ಅವೆಲ್ಲವೂ ಚೆನ್ನಾಗಿ ಬೆಂದು ಮೇಲೆ ತೇಲುತ್ತವೆ, ಮತ್ತೆ ತಿರುಗಿಸಿ, ಬೇಗ ಬೇಯುತ್ತದೆ, ಆಗಾಗಿ ಉರಿ ನೋಡಿಕೊಳ್ಳಿ. ತೆಳು ಕಂದು ಬಣ್ಣ ಬಂದ ನಂತರ ಬೇಗ ಎಲ್ಲವನ್ನು ತೆಗೆದು, ಎಣ್ಣೆ ಹೀರಿಕೊಳ್ಳಲು ಪೇಪರ್ ಟವಲ್ ಮೇಲೆ ಹಾಕಿ. ಅದೇ ರೀತಿ ಎಲ್ಲವನ್ನು ತಯಾರಿಸಿ. ತಣ್ಣಗಾಗಲು ಬಿಡಿ. ತಣ್ಣಗಾದ ಮೇಲೆ ಗಾಳಿಯಾಡದ ಡಬ್ಬಿಯಲ್ಲಿ ತುಂಬಿಡಿ. ಇದು ಯಾವಾಗ ಬೇಕಾದರು ತಿನ್ನಲು ರುಚಿಯಾಗಿರುತ್ತದೆ. ಎಷ್ಟು ದಿನ ಬೇಕಾದರೂ ಇಡಬಹುದು.ಸ್ವಲ್ಪ ಸಿಹಿ ಬಿಸ್ಕತ್ ತರಹ ಬರುವುದರಿಂದ ರುಚಿ ಚೆನ್ನಾಗಿರುತ್ತದೆ, ಮಕ್ಕಳಿಗೆ ತುಂಬಾ ಇಷ್ಟವಾಗುತ್ತದೆ.

Monday, June 30, 2008

Carrot Salad / Gajjari kosumbari

ಕ್ಯಾರೆಟ್ ಕೋಸುಂಬರಿ:

ಸಾಮಗ್ರಿಗಳು:

ಕ್ಯಾರೆಟ್ ತುರಿದಿದ್ದು
ಈರುಳ್ಳಿ ಸಣ್ಣಗೆ ಹೆಚ್ಚಿದ್ದು
ಹಸಿಮೆಣಸಿನ ಕಾಯಿ ಪೇಸ್ಟ್ ಅಥವ ಸಣ್ಣಗೆ ಹೆಚ್ಚಿದ್ದು
ಕಾಯಿತುರಿ ಬೇಕಾದರೆ
ಕೊತ್ತುಂಬರಿ ಸೊಪ್ಪು ಹೆಚ್ಚಿದ್ದು ಸ್ವಲ್ಪ
ಉಪ್ಪು ರುಚಿಗೆ

ಉಪ್ಪು ಮಾತ್ರ ಬಿಟ್ಟು ಎಲ್ಲಾ ಸಾಮಗ್ರಿಗಳನ್ನು ಹಾಕಿ ಚೆನ್ನಾಗಿ ಬೆರೆಸಿ, ಉಪ್ಪನ್ನು ನೀಡುವಾಗ ಬೆರೆಸಿ ಕೊಡಿ. ಇದು ಅತೀ ಸುಲಭ ಕೋಸುಂಬರಿ ಮತ್ತು ರುಚಿ ಕೂಡ ಹಾಗೂ ಹಸಿಯಾಗಿ ಕ್ಯಾರೆಟ್ ಸೇವಿಸುವುದರಿಂದ ಆರೋಗ್ಯಕ್ಕೂ ಉತ್ತಮ.

Thursday, June 19, 2008

Vegetable Curry/Saagu - ತರಕಾರಿ ಸಾಗು:


ತರಕಾರಿ ಸಾಗು:

ಸಾಮಗ್ರಿಗಳು:

ತರಕಾರಿಗಳು ನಿಮ್ಮ ಇಷ್ಟ--
ಕ್ಯಾರೆಟ್,ಹುರುಳಿಕಾಯಿ,ಬಟಾಣಿ
ಹೂಕೋಸು,ಎಲೆಕೋಸು,ಹೀರೆಕಾಯಿ
ಬದನೆಕಾಯಿ,ಆಲೂಗೆಡ್ಡೆ,ಟಮೋಟ
ಕಾರ್ನ್ ( ಮೆಕ್ಕೆಜೋಳದ ಕಾಳುಗಳು)-ಕ್ಯಾನ್ ಅಥವ ಫ಼್ರೆಶ್
ಅಚ್ಚ ಖಾರದ ಪುಡಿ
ಧನಿಯ ಪುಡಿ
ಸಾರಿನಪುಡಿ
ಗರಂಮಸಾಲಾ
ಈರುಳ್ಳಿ
ಎಣ್ಣೆ,ಸಾಸಿವೆ,ಜೀರಿಗೆ
ಕರಿಬೇವು, ಅರಿಸಿನ
ಉಪ್ಪು,
ಕಾಯಿತುರಿ / ಕೊಬ್ರಿತುರಿ
ಕೊತ್ತುಂಬರಿಸೊಪ್ಪು

ವಿಧಾನ:

ಬಟಾಣಿಯನ್ನು ಬಿಟ್ಟು ಮಿಕ್ಕ ಎಲ್ಲಾ ತರಕಾರಿಗಳನ್ನು ಹೆಚ್ಚಿಕೊಳ್ಳಿ.
ಕುಕ್ಕರ್ ನಲ್ಲಿ ಸ್ವಲ್ಪ ಎಣ್ಣೆಯನ್ನು ಹಾಕಿ,ಕಾದ ಬಳಿಕ ಸಾಸಿವೆ,ಜೀರಿಗೆ ,ಈರುಳ್ಳಿ ಹಾಕಿ ಒಂದೆರಡು ನಿಮಿಷ ಹುರಿದು,ಹೆಚ್ಚಿದ ತರಕಾರಿಗಳನ್ನು ಹಾಕಿ,ಚೆನ್ನಾಗಿ ಬೆರೆಸಿ,ಕೆಲವು ನಿಮಿಷ ತಿರುಗಿಸಿ ಬಟಾಣಿಕಾಳುಗಳನ್ನು ಹಾಕಿ ಅದನ್ನು ಬೆರೆಸಿ,ಒಂದೆರಡು ನಿಮಿಷದ ನಂತರ ಅರಿಸಿನ,ಕರಿಬೇವು,ಕಾರದಪುಡಿ,ಧನಿಯಾಪುಡಿ,ಸ್ವಲ್ಪ ಸಾರಿನಪುಡಿ ಮತ್ತು ಉಪ್ಪು ಹಾಕಿ,ಚೆನ್ನಾಗಿ ತಿರುಗಿಸಿ,ಅಗತ್ಯವಿರುವಷ್ಟು ನೀರು ಹಾಕಿ ಉಪ್ಪು,ಕಾಯಿತುರಿ/ಕೊಬ್ರಿತುರಿ ಮತ್ತು ಸ್ವಲ್ಪ ಕೊತ್ತುಂಬರಿಸೊಪ್ಪನ್ನು ಹಾಕಿ ಎಲ್ಲವನ್ನು ಸರಿಯಾಗಿ ಬೆರೆಸಿ,ಗರಂಮಸಾಲ ಸಹ ಹಾಕಿ ತಿರುಗಿಸಿ.ಮುಚ್ಚಳ ಹಾಕಿ. ಬೇಯಿಸಿ. ತರಕಾರಿಗಳನ್ನು ತುಂಬಾ ಬೇಯಿಸಬಾರದು.ನೋಡಿಕೊಂಡು ಒಲೆಯಿಂದ ಇಳಿಸಿ.
ಮತ್ತೆ ಕೊತ್ತುಂಬರಿಸೊಪ್ಪನ್ನು ಹಾಕಿ ತಿರುಗಿಸಿ. ತರಕಾರಿ ಸಾಗು ತಯಾರಾಗುತ್ತದೆ. ಇದನ್ನು ಚಪಾತಿ,ಪೂರಿ,ಪರೋಟ ಮತ್ತು ದೋಸೆಯೊಂದಿಗೆ ಸಹ ತಿನ್ನಬಹುದು. ಅನ್ನಕ್ಕು ತುಂಬಾ ಚೆನ್ನಾಗಿರುತ್ತದೆ. ಮಕ್ಕಳಿಗೆ ಸಾಗು ಅನ್ನ ಇಷ್ಟವಾಗುತ್ತದೆ. ಯಾವುದಕ್ಕಾದರೂ ಸರಿ ಇಲ್ಲವೆಂದರೆ ಊಟಕ್ಕೂ ಕೂಡ ನೆಂಚಿಕೊಳ್ಳಬಹುದು.

*ಎಲ್ಲಾ ತರಕಾರಿಗಳು ಬೇಕೇಬೇಕು ಅಂತ ಏನು ಇಲ್ಲ. ಕೆಲವು ನಿಮಗೆ ಬೇಕೆನಿಸಿದಂತೆ ಹಾಕಿಕೊಳ್ಳಬಹುದು.

Sunday, June 15, 2008

ಕಡ್ಲೆಕಾಳು ಹುಳಿ / Sprouted Channa Masala Curry


ಕಡ್ಲೆಕಾಳಿನ ಮಸಾಲೆ ಸಾರು/ ಕಡ್ಲೆಕಾಳು ಹುಳಿ:

ಬೇಕಾಗುವ ಸಾಮಗ್ರಿಗಳು:

ಕಪ್ಪು / ಕೆಂಪು ಕಡಲೆಕಾಳು- ಒಂದು ಬಟ್ಟಲು
ತೆಂಗಿನಕಾಯಿ -ಅರ್ಧ ಬಟ್ಟಲು
ಈರುಳ್ಳಿ- ಎರಡು
ಬೆಳ್ಳುಳ್ಳಿ- ನಾಲ್ಕೈದು ಎಸಳು
ಶುಂಠಿ -ಒಂದಿಂಚು
ಹಸಿಮೆಣಸಿನಕಾಯಿ - ಒಂದು
ಹುರಿಗಡಲೆ ಸ್ವಲ್ಪ
ಗಸಗಸೆ-ಒಂದು ಚಿಕ್ಕ ಚಮಚ
ಅಚ್ಚಖಾರದ ಪುಡಿ
ಧನಿಯಾ ಪುಡಿ
ಚೆಕ್ಕೆ,ಲವಂಗ,ಏಲಕ್ಕಿ,ಮೊಗ್ಗು,ಮೆಣಸು
ಕೊತ್ತುಂಬರಿ ಸೊಪ್ಪು
ಪುದೀನ ಸೊಪ್ಪು
ತರಕಾರಿ (ಬೇಕಾದರೆ- ಆಲೂಗೆಡ್ಡೆ,ಬದನೆಕಾಯಿ,ಹೂಕೋಸು)
ಟಮೋಟೊ - ಎರಡು,ಹೆಚ್ಚಿಕೊಳ್ಳಿ
ಉಪ್ಪು
ಎಣ್ಣೆ

ತಯಾರಿಸುವ ವಿಧಾನ:

ಕಡಲೆಕಾಳನ್ನು ಚೆನ್ನಾಗಿ ತೊಳೆದು,ಹಿಂದಿನ ರಾತ್ರಿ ನೆನೆಸಿ,ಮಾರನೆ ದಿನ ಮತ್ತೆ ಚೆನ್ನಾಗಿ ತೊಳೆದು ನೀರು ಬಸಿದುಕೊಂಡು,ಕಾಳನ್ನು ಗಾಳಿ ಆಡದ ಡಬ್ಬಿಯಲ್ಲಿ ಹಾಕಿಡಿ. ಅಥವ ಜಾಲರಿಗೆ ಹಾಕಿ ಮುಚ್ಚಿಟ್ಟರೆ ಸಹ ಮೊಳಕೆ ಬರುತ್ತದೆ. ನಮ್ಮ ಅಜ್ಜಿ,ಅಮ್ಮ ಮಾಡುತ್ತಿದ್ದ ತರಹ ಒಂದು ಕಾಟನ್ ಬಟ್ಟೆಯಲ್ಲಿ ಕಾಳನ್ನು ಹಾಕಿ ಗಂಟು ಕಟ್ಟಿ ಇಡಿ. ಮಾರನೇ ದಿನಕ್ಕೆ ಅದು ಮೊಳಕೆ ಬಂದಿರುತ್ತದೆ,(ಜಾಸ್ತಿ ಮೊಳಕೆ ಬೇಕಾದರೆ ಎರಡು ದಿನ ಬಿಡಿ). ಈಗ ಮೊಳಕೆ/ಮೊಳೆತ ಕಾಳು ರೆಡಿ.
*ಮೊಳಕೆ ಕಾಳು,ಮಡಿಕೆ ಕಾಳು ಅಥವ ಮೊಳೆತ ಕಾಳು ಹೀಗೆ ಒಬ್ಬೊಬ್ಬರು ಒಂದೊಂದು ರೀತಿ ಕರೆಯುತ್ತಾರೆ.

ಮಸಾಲೆ ತಯಾರಿಸಲು:
ಈರುಳ್ಳಿಯನ್ನು ಸುಮಾರಾಗಿ ಹೆಚ್ಚಿಕೊಂಡು ಅದನ್ನು ಬೆಳ್ಳುಳ್ಳಿ ಮತ್ತು ಶುಂಠಿಯೊಂದಿಗೆ ಒಂದು ಚಮಚ ಎಣ್ಣೆಯನ್ನು ಹಾಕಿ ಹುರಿದುಕೊಳ್ಳಿ. ಅದಕ್ಕೆ ಚೆಕ್ಕೆ, ಲವಂಗ,ಏಲಕ್ಕಿ,ಮೊಗ್ಗು,ಮೆಣಸು,ಹಸಿಮೆಣಸಿನಕಾಯಿ,ಪುದೀನ ಸೊಪ್ಪು ಮತ್ತು ಕೊತ್ತುಂಬರಿಸೊಪ್ಪು ಕೂಡ ಹಾಕಿ ಒಂದೆರಡು ನಿಮಿಷ ಹುರಿದುಕೊಳ್ಳಿ. ಹುರಿದ ಈ ಮಿಶ್ರಣದ ಜೊತೆಗೆ ಟಮೋಟೊ,ಹುರಿಗಡಲೆ,ಅಚ್ಚಖಾರದ ಪುಡಿ,ಧನಿಯಾಪುಡಿ,ಗಸಗಸೆ ಮತ್ತು ತೆಂಗಿನಕಾಯಿ ತುರಿ ಎಲ್ಲವನ್ನೂ ಸೇರಿಸಿ, ನುಣ್ಣಗೆ ರುಬ್ಬಿಕೊಳ್ಳಿ. ಮಸಾಲೆ ರೆಡಿಯಾಯಿತು.

ಮೊದಲು ಪಾತ್ರೆಗೆ ಸ್ವಲ್ಪ ಎಣ್ಣೆಯನ್ನು ಹಾಕಿ, ಅದಕ್ಕೆ ಚಿಟಿಕೆ ಸಾಸಿವೆ ಹಾಕಿ, ಚಟಪಟ ಅಂದ ಮೇಲೆ ತರಕಾರಿ ಹಾಕಿ, ಒಂದೆರಡು ನಿಮಿಷ ಹುರಿದು, ಕಾಳುಗಳನ್ನು ಹಾಕಿ ಅದನ್ನು ಐದು/ಆರು ನಿಮಿಷ ಹುರಿದು,ಅರಿಶಿಣ,ಉಪ್ಪು ಮತ್ತು ರುಬ್ಬಿದ ಮಸಾಲೆ ಹಾಕಿ ಚೆನ್ನಾಗಿ ತಿರುವಿ,ಉಪ್ಪು ಮತ್ತು ಕಾರ ನಿಮ್ಮ ರುಚಿಗೆ ತಕ್ಕಷ್ಟು ಬೆರೆಸಿ,ನೀರು ಹಾಕಿ ಮುಚ್ಚಿಟ್ಟು ಬೇಯಿಸಿ.ಕಾಳುಗಳು ಬೇಯುವವರೆಗು ಬೇಯಿಸಿ.ಇಳಿಸಿ.ಕಡ್ಲೆಕಾಳು ಹುಳಿ ತಯಾರಾಗುತ್ತದೆ. ಈ ಮಸಾಲೆ ಸಾರಿಗೆ ರಾಗಿಮುದ್ದೆ ಚೆನ್ನಾಗಿರುತ್ತದೆ. ಇದನ್ನು ಬಿಳಿಅನ್ನ,ಜೀರಾ ರೈಸ್ ,ಚಪಾತಿ,ಪೂರಿ,ಪರೋಟ ಅಥವಾ ರೊಟ್ಟಿ ಯಾವುದರೊಂದಿಗಾದರೂ ಸರ್ವ್ ಮಾಡಿ.
* ಕುಕ್ಕರ್ ನಲ್ಲಿಯಾದರೆ ಒಂದು ಕೂಗು ಸಾಕು. ಅದರಲ್ಲಿ ಬೇಗ ಬೇಯುತ್ತದೆ ಕಾಳುಗಳು. ಸಾರಿಗೆ ನೀರು ನಿಮಗೆ ಹೇಗೆ ಬೇಕೋ ಸೇರಿಸಿಕೊಳ್ಳಿ. ಅನ್ನಕ್ಕೆ ಸ್ವಲ್ಪ ತೆಳು ಮಾಡಿಕೊಳ್ಳಿ. ಬೇರೆ ಸೈಡ್ ಡಿಶ್ ಗಾದರೆ ಗಟ್ಟಿಯಾಗಿ ತಯಾರಿಸಿ. ಮಕ್ಕಳಿಗೆ ಈ ಕಡ್ಲೆಕಾಳು ಸಾರು ತುಂಬಾ ಇಷ್ಟವಾಗುತ್ತದೆ.

Saturday, June 14, 2008

CabbageBeansBassaaru-ಕೋಸು-ಬೀನ್ಸ್ ಬಸ್ಸಾರು ಮತ್ತು ಪಲ್ಯ:

ಕೋಸು-ಬೀನ್ಸ್ ಬಸ್ಸಾರು ಮತ್ತು ಪಲ್ಯ:
ಸಾರಿಗೆ ಬೇಕಾಗುವ ಸಾಮಾಗ್ರಿಗಳು:

ತೊಗರಿಬೇಳೆ -ಎರಡು ಕಪ್
ಹುರುಳಿಕಾಯಿ/ಬೀನ್ಸ್
ಎಲೆಕೋಸು
ಈರುಳ್ಳಿ ಒಂದು
ಬೆಳ್ಳುಳ್ಳಿ
ಜೀರಿಗೆ ಒಂದು ದೊಡ್ಡ ಚಮಚ
ಮೆಣಸು ಏಳೆಂಟು ಕಾಳು
ಅರಿಸಿನದಪುಡಿ
ಹುಣಸೆಹಣ್ಣು ಅಥವಾ ಹುಣಸೆರಸ
ಅಚ್ಚಖಾರದ ಪುಡಿ
ಸಾಂಬಾರ್/ಸಾರಿನ ಪುಡಿ - ಅರ್ಧ ಚಮಚ
ಕಾಯಿತುರಿ/ಕೊಬ್ರಿತುರಿ ಸ್ವಲ್ಪ-ಎರಡು ಚಮಚ
ಕೊತ್ತುಂಬರಿಸೊಪ್ಪು
ಕರಿಬೇವಿನ ಸೊಪ್ಪು
ಉಪ್ಪು
ಎಣ್ಣೆ
ತಯಾರಿಸುವವಿಧಾನ:

ಮೊದಲು ಹುರುಳಿಕಾಯಿ ಮತ್ತು ಎಲೆಕೋಸನ್ನು ಸಣ್ಣಗೆ ಹೆಚ್ಚಿಕೊಳ್ಳಿ.
ಪಾತ್ರೆಯಲ್ಲಿ ನೀರು ಹಾಕಿ, ಅದಕ್ಕೆ ತೊಳೆದ ತೊಗರೆಬೇಳೆಯನ್ನು, ಚಿಟಿಕೆ ಅರಿಶಿಣ ಮತ್ತು ಒಂದು ಚಮಚ ಎಣ್ಣೆಯನ್ನು ಹಾಕಿ,ಬೇಳೆ ಬೇಯಲು ಬಿಡಿ.ಬೇಳೆ ಸ್ವಲ್ಪ ಬೆಂದ ನಂತರ ಅದಕ್ಕೆ ಹೆಚ್ಚಿಟ್ಟುಕೊಂಡಿರುವ ತರಕಾರಿ ಹಾಕಿ ಜೊತೆಯಲ್ಲಿ ಸ್ವಲ್ಪ ಉಪ್ಪನ್ನು ಹಾಕಿ,ತರಕಾರಿ ಬೇಯುವವರೆಗೂ ಬೇಯಿಸಿ,ಬೇಳೆ ಕರಗದಂತೆ ಬೇಯಿಸಿಕೊಳ್ಳಿ.ತುಂಬಾ ನುಣ್ಣಗೆ ಬೇಯಿಸಬೇಡಿ,ನಂತರ ಬೇಳೆ ಮತ್ತು ತರಕಾರಿ ಮಿಶ್ರಣವನ್ನು ಜಾಲರಿಯಲ್ಲಿ (ಕೊಲಾಂಡರ್/ಸ್ಟ್ರೈನರ್) ಸೋಸಿಕೊಂಡು,ಸಾರಿನ ಕಟ್ಟು ಮತ್ತು ತರಕಾರಿ ಬೇಳೆ ಮಿಶ್ರಣವನ್ನು ಬೇರೆಬೇರೆಯಾಗಿ ತೆಗೆದಿಟ್ಟುಕೊಳ್ಳಿ.
ಸಾರಿಗೆ ರುಬ್ಬಿಕೊಳ್ಳಲು:
ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಒಂದೆರಡು ನಿಮಿಷ ಹುರಿದುಕೊಂಡು,ಅದಕ್ಕೆ ಒಂದೆರಡು ಚಮಚ ಬೇಯಿಸಿದ ಬೇಳೆ ಮತ್ತು ತರಕಾರಿ ಮಿಶ್ರಣವನ್ನು,ಎರಡು ಚಮಚ ಕಾಯಿತುರಿ/ಕೊಬ್ರಿ,ಜೀರಿಗೆ,ಅಚ್ಚಖಾರದಪುಡಿ,ಮೆಣಸು,ಸಾರಿನಪುಡಿ,ಹುಣಸೆಹಣ್ಣು,ಕೊತ್ತುಂಬರಿಸೊಪ್ಪು ಎಲ್ಲವನ್ನೂ ಸೇರಿಸಿ,ನುಣ್ಣಗೆ ರುಬ್ಬಿಕೊಳ್ಳಿ.
ಸಾರಿನ ಒಗ್ಗರಣೆಗೆ-
ಒಂದೆರಡು ಚಮಚ ಎಣ್ಣೆ ಹಾಕಿ,ಸಾಸಿವೆ ಮತ್ತು ಜೀರಿಗೆ ಹಾಕಿ,ಕರಿಬೇವು,ಇಂಗು ಮತ್ತು ಜಜ್ಜಿದ ಬೆಳ್ಳುಳ್ಳಿಯನ್ನು ಹಾಕಿ ಅದರ ನಂತರ ರುಬ್ಬಿದ ಮಸಾಲೆಯನ್ನು ಹಾಕಿ ಒಂದು ನಿಮಿಷ ಕುದಿಸಿ,ಬಸಿದಿಟ್ಟುಕೊಂಡ ಸಾರಿನಕಟ್ಟನ್ನು ಹಾಕಿ,ಚೆನ್ನಾಗಿ ಬೆರೆಸಿ. ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಒಂದೇ ಒಂದು ಕುದಿ ಬರಿಸಿ ಇಳಿಸಿ.'ಬಸ್ಸಾರು' ತಯಾರು.
ಈಗ ಬೇಳೆ-ತರಕಾರಿ ಪಲ್ಯಕ್ಕೆ:
ಒಗ್ಗರಣೆಗೆ -
ಎಣ್ಣೆಹಾಕಿ,ಸಾಸಿವೆ,ಕರಿಬೇವು,ಜಜ್ಜಿದ ಬೆಳ್ಳುಳ್ಳಿ,ಸಣ್ಣಗೆ ಹೆಚ್ಚಿಟ್ಟುಕೊಂಡ ಈರುಳ್ಳಿ ಮತ್ತು ಹಸಿಮೆಣಸಿನಕಾಯಿಯನ್ನು ಹಾಕಿ,ಚಿಟಿಕೆ ಉಪ್ಪನ್ನು ಹಾಕಿ. ಅದನ್ನು ಹುರಿದುಕೊಂಡ ನಂತರ ತರಕಾರಿ-ಬೇಳೆ ಮಿಶ್ರಣವನ್ನು ಹಾಕಿ,ಚೆನ್ನಾಗಿ ಬೆರೆಸಿ. ಉಪ್ಪನ್ನು ಬೇಯುವಾಗ ಹಾಕಿರುವುದರಿಂದ ಈಗ ಬೇಕೆನಿಸಿದರೆ ಹಾಕಿಕೊಳ್ಳಿ. ಕೊನೆಯಲ್ಲಿ ತೆಂಗಿನತುರಿ ಹಾಕಿ ಚೆನ್ನಾಗಿ ಬೆರೆಸಿ. 'ಪಲ್ಯ' ತಯಾರು.
* ಹುಣಸೆಹಣ್ಣನ್ನು ಹಾಕಿದರೆ ರುಬ್ಬುವಾಗ ಹಾಕಿ ಅಥವಾ ಹುಣಸೆರಸವನ್ನು ಉಪಯೋಗಿಸುವುದಾದರೆ ಸಾರು ಕುದಿಯುವಾಗ ಹಾಕಿ,ಕುದಿಸಿ,ಇಳಿಸಿ.
* ಸಾರಿಗೆ ಒಂದು ಸ್ವಲ್ಪ ಬೆಲ್ಲವನ್ನು ಹಾಕಬಹುದು.(ಇಷ್ಟಪಡುವವರು)
* ಪಲ್ಯಕ್ಕೆ ಕಾಯಿತುರಿ ಬೇಕಾದರೆ ಹಾಕಬಹುದು,ರುಚಿ ಹೆಚ್ಚು ಕೊಡುತ್ತದೆ. ಇಲ್ಲ ಅಂದರೆ ಕೊಕೊನಟ್ ಪೌಡರ್ ಕೂಡ ಹಾಕಬಹುದು.
* ಬಸ್ಸಾರಿಗೆ ಕೊತ್ತುಂಬರಿ ಸೊಪ್ಪು,ಬೆಳ್ಳುಳ್ಳಿ ಹೆಚ್ಚಿಗೆ ಇದ್ದರೆ ರುಚಿ ಜಾಸ್ತಿ. ಉಪ್ಪು ಮತ್ತು ಕಾರವೆಲ್ಲಾ ನಿಮ್ಮ ರುಚಿಗೆ ತಕ್ಕಂತೆ ಹಾಕಿ ತಯಾರಿಸಿ.
* ಬಸ್ಸಾರನ್ನು ರಾಗಿಮುದ್ದೆ ಮತ್ತು ಬಿಳಿ ಅನ್ನದೊಂದಿಗೆ ಸರ್ವ್ ಮಾಡಿ. ಬಸ್ಸಾರು ತಯಾರಿಸಿದ ದಿನಕ್ಕಿಂತ ಮಾರನೇದಿನ ತುಂಬಾ ರುಚಿಯಾಗಿರುತ್ತದೆ. ಈ ಸಾರು ಕುದಿಸಿದಷ್ಟು ರುಚಿ ಹೆಚ್ಚು.
* ಜಾಲರಿ ಎಂದರೆ colander / strainer ಇದನ್ನು ಉಪಯೋಗಿಸಿ ಕಟ್ಟು ಬಸಿದುಕೊಳ್ಳಿ.
* ಬಸ್ಸಾರು ನಮ್ಮ ಕರ್ನಾಟಕದಲ್ಲಿ ತುಂಬಾ ಮನೆಮಾತಾಗಿದೆ. ಬಸ್ಸಾರುಗಳಿಗೆ ಸಾಮಾನ್ಯವಾಗಿ ರಾಗಿಮುದ್ದೆ ಇದ್ದೇಇರುತ್ತದೆ.

Popular Posts